
ವಿಜಯಪುರ (24.01.2021) : ಅನುದಾನಿತ ಶಾಲೆಗಳಲ್ಲಿ ನಿವೃತ್ತಿ ಹಾಗೂ ಮರಣ ಹೊಂದಿದ ಶಿಕ್ಷಕರ ಸ್ಥಾನಗಳಿಗೆ ಭರ್ತಿ ಮಾಡಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆಯಲ್ಲಿ ಪ್ರಕಟಗೊಂಡಿರುವ ಕಡ್ಡಾಯ ವರ್ಗಾವಣೆ ಶಿಕ್ಷಕರಿಗೆ ಆದ್ಯತೆ ನೀಡಿದ ನಿಯಮಕ್ಕೆ ಕೆಎಟಿ ತಡೆ ನೀಡಿದೆ. ಆದರೆ, ಹೊಸ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಗೆ ತಡೆಯಾಜ್ಞೆ ನೀಡಿಲ್ಲ. ಈ ಬಗ್ಗೆ ಸರ್ಕಾರದ ಅಡ್ವೋಕೆಟ್ ಜನರಲ್ ಜೊತೆ ಚರ್ಚಿಸಿ, ಕೆಎಟಿಗೆ ಪ್ರಕರಣ ತ್ವರಿತಗತಿಯಲ್ಲಿ ವಿಚಾರಣೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು.